ರಾಯಚೂರು, ಜೂನ್ 8: ಸರ್ಕಾರದ ವಿವಿಧ ಯೋಜನೆಗಳು ಮತ್ತು ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುವಂತೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಭಾರತ ಸರ್ಕಾರದ ವಾಣಿಜ್ಯ ಇಲಾಖೆಯ ಜಂಟಿ ಕಾರ್ಯದರ್ಶಿ ಹಾಗೂ ರಾಯಚೂರು ಮಹತ್ವಾಕಾಂಕ್ಷಿ ಜಿಲ್ಲೆಯ ಕೇಂದ್ರ ಪ್ರಭಾರಿ ಅಧಿಕಾರಿ ಉಜ್ವಲ ಕುಮಾರ್ ಘೋಷ್ ಹೇಳಿದರು.
ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಮಹತ್ವಾಕಾಂಕ್ಷಿ ಜಿಲ್ಲೆ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ದೇಶದ 112 ಮಹತ್ವಾಕಾಂಕ್ಷಿ ಜಿಲ್ಲೆಗಳು ಹಾಗೂ 500 ಬ್ಲಾಕ್ಗಳ ಸುಸ್ಥಿರ ಅಭಿವೃದ್ಧಿಗೆ ಕೇಂದ್ರ ಸರ್ಕಾರ ವಿಶೇಷ ಆದ್ಯತೆ ನೀಡಿದ್ದು, ಕೃಷಿ, ಶಿಕ್ಷಣ, ಆರೋಗ್ಯ, ನೀರಾವರಿ, ಮೂಲಸೌಕರ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಕೌಶಲಾಭಿವೃದ್ಧಿ ಕ್ಷೇತ್ರಗಳಲ್ಲಿ ಹಿಂದುಳಿದ ಪ್ರದೇಶಗಳನ್ನು ಅಭಿವೃದ್ಧಿಪಡಿಸುವುದು ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಸರ್ಕಾರದ ಸಾಲ ಸೌಲಭ್ಯಗಳು, ಪಿಂಚಣಿ ಯೋಜನೆಗಳು ಹಾಗೂ ಇತರ ಕಲ್ಯಾಣ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಒತ್ತು ನೀಡಬೇಕು. ಶೇ.100ರಷ್ಟು ಆಧಾರ್ ಜೋಡಣೆ ಕಾರ್ಯ ಪೂರ್ಣಗೊಳಿಸಬೇಕು ಹಾಗೂ ನೀತಿ ಆಯೋಗದ ಎಲ್ಲಾ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಜಾರಿಗೊಳಿಸಿ ಅನುದಾನವನ್ನು ಸಮರ್ಥವಾಗಿ ಬಳಸಿಕೊಳ್ಳಬೇಕು ಎಂದು ಸೂಚಿಸಿದರು. ಈ ವೇಳೆ ಮಾತನಾಡಿದ ರಾಯಚೂರು ಜಿಲ್ಲಾಧಿಕಾರಿ ಪೂವಿತಾ ಎಸ್., ಮಹತ್ವಾಕಾಂಕ್ಷಿ ಜಿಲ್ಲೆ ಯೋಜನೆಯಡಿ ಜಿಲ್ಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಪ್ರಗತಿ ಸಾಧಿಸಲಾಗಿದ್ದು, ಹಲವು ಸೂಚ್ಯಂಕಗಳಲ್ಲಿ ಉತ್ತಮ ಸ್ಥಾನ ಗಳಿಸಲಾಗಿದೆ ಎಂದರು. ಆರೋಗ್ಯ, ಪೌಷ್ಟಿಕತೆ, ಕೃಷಿ, ಜಲಸಂಪನ್ಮೂಲ, ಶಿಕ್ಷಣ, ಆರ್ಥಿಕ ಸೇರ್ಪಡೆ, ಕೌಶಲಾಭಿವೃದ್ಧಿ ಹಾಗೂ ಮೂಲಸೌಕರ್ಯ ಸೇರಿದಂತೆ 49 ಸೂಚ್ಯಂಕಗಳ ಅನುಷ್ಠಾನಕ್ಕೆ ಹೆಚ್ಚಿನ ಗಮನ ಹರಿಸಲು ಅಧಿಕಾರಿಗಳಿಗೆ ಸೂಚಿಸಿದರ
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ್ ಕಾಂದೂ ಮಾತನಾಡಿ, "ಪೌಷ್ಟಿಕ ರಾಯಚೂರು" ಯೋಜನೆಯಡಿ 250 ದುರ್ಬಲ ಗ್ರಾಮಗಳನ್ನು ಗುರುತಿಸಿ ತಾಯಂದಿರು, ಮಕ್ಕಳು ಹಾಗೂ ಹದಿಹರೆಯದವರ ಆರೋಗ್ಯ ಸುಧಾರಣೆಗೆ ವಿಶೇಷ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.
ರಾಯಚೂರು, ಮಾನ್ವಿ, ಸಿಂಧನೂರು ಹಾಗೂ ಲಿಂಗಸುಗೂರಿನಲ್ಲಿ ಸ್ಥಾಪಿಸಲಾದ ಎಂಸಿಎಚ್ ಆಸ್ಪತ್ರೆಗಳಲ್ಲಿ 7,020 ಹೆರಿಗೆಗಳನ್ನು ಯಶಸ್ವಿಯಾಗಿ ನಿರ್ವಹಿಸಲಾಗಿದೆ. ಅಂಗನವಾಡಿ ಕೇಂದ್ರಗಳ ಮೂಲಕ ಮಕ್ಕಳ ಬೆಳವಣಿಗೆ ಮೇಲ್ವಿಚಾರಣೆ ಹಾಗೂ ಪೌಷ್ಟಿಕಾಂಶ ಸಲಹೆಗಳನ್ನು ನಿರಂತರವಾಗಿ ನೀಡಲಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಡಾ. ಟಿ. ರೋಣಿ ಮಾಹಿತಿ ನೀಡುತ್ತಾ, 2011ರ ಜನಗಣತಿಯ ಪ್ರಕಾರ ಜಿಲ್ಲೆಯ ಜನಸಂಖ್ಯೆ 19.28 ಲಕ್ಷವಾಗಿದ್ದು, 8 ತಾಲೂಕುಗಳು, 179 ಗ್ರಾಮ ಪಂಚಾಯಿತಿಗಳು, 1,658 ಶಾಲೆಗಳು, ಸರ್ಕಾರಿ ವೈದ್ಯಕೀಯ ಕಾಲೇಜು, 4 ತಾಲೂಕು ಆಸ್ಪತ್ರೆಗಳು, 6 ಸಮುದಾಯ ಆರೋಗ್ಯ ಕೇಂದ್ರಗಳು ಹಾಗೂ ಕೃಷಿ ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಮಾತನಾಡಿ, 10ನೇ ತರಗತಿ ಫಲಿತಾಂಶದಲ್ಲಿ ಜಿಲ್ಲೆ ರಾಜ್ಯದಲ್ಲಿ 21ನೇ ಸ್ಥಾನ ಪಡೆದಿದ್ದು, ಶಾಲಾ ತಪಾಸಣೆ ಹಾಗೂ ಮನೆ-ಮನೆ ಸಮೀಕ್ಷೆಗಳ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರುಶಾಲೆಗೆ ಸೇರಿಸಲಾಗುತ್ತಿದೆ ಎಂದು ಹೇಳಿದರು.
ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಪ್ರಕಾಶ್ ಚೌವ್ಹಾಣ್ ಮಾತನಾಡಿ, ಜಿಲ್ಲೆಯಲ್ಲಿ 17,138 ಮಣ್ಣಿನ ಆರೋಗ್ಯ ಕಾರ್ಡ್ಗಳನ್ನು ವಿತರಿಸಲಾಗಿದೆ. ನರೇಗಾ ಯೋಜನೆಯಡಿ 10,794 ಜಲಮೂಲಗಳನ್ನು ಪುನರುಜ್ಜೀವನಗೊಳಿಸಲಾಗಿದ್ದು, 6 ಕೃಷಿ ಮಾರುಕಟ್ಟೆಗಳು ಇ-ನಾಮ್ ವ್ಯವಸ್ಥೆಗೆ ಸಂಪರ್ಕಗೊಂಡಿವೆ ಎಂದು ತಿಳಿಸಿದರು.
ಹನಿ ಹಾಗೂ ತುಂತುರು ನೀರಾವರಿ, ನೀರು ಸಂರಕ್ಷಣಾ ತಂತ್ರಜ್ಞಾನಗಳ ಕುರಿತು ರೈತರಿಗೆ ಜಾಗೃತಿ ಮೂಡಿಸಲಾಗುತ್ತಿದ್ದು, ಪ್ರಾಣಿಗಳಿಗೆ ಶೇ.100ರಷ್ಟು ಲಸಿಕೆ ನೀಡಲಾಗಿದೆ. ಜೊತೆಗೆ ನೀತಿ ಆಯೋಗದ ಸಹಕಾರದಿಂದ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ 24 ಜಲಮೂಲಗಳ ಪುನರುಜ್ಜೀವನ ಕಾರ್ಯ ಕೈಗೊಳ್ಳಲಾಗಿದೆ ಎಂದು ಹೇಳಿದರು. ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.













